ವರದಿ : ಮಿಯಾಲಾಲ ಕಿಲ್ಲೇದಾರ
ಚಿಕ್ಕೋಡಿ :–
ಚಿಕ್ಕೋಡಿ ಲೋಕಸಭಾ ಸಾರ್ವತ್ರಿಕ ಚುನಾವಣೆ*
ಚುನಾವಣೆ ಸಿದ್ಧತೆ, ವಿವಿಧ ಕಾರ್ಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಚುನಾವಣಾ ಸಾಮಾನ್ಯ ವೀಕ್ಷಕರು
ಚಿಕ್ಕೋಡಿ (ಏ.19): ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಆಗಮಿಸಿರುವ ಜಿ.ಎಸ್.ಪಾಂಡಾ ದಾಸ್ ಅವರು ಶುಕ್ರವಾರ (ಎ.19) ರಂದು ಸಾಯಂಕಾಲ ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳೊಂದಿಗೆ ಹಾಗೂ ಸಹಾಯಕ ಚುನವಣಾಧಿಕರಿಗಳೊಂದಿಗೆ ಸಭೆ ಜರುಗಿಸಿ, ಚಿಕ್ಕೋಡಿ ಲೋಕ ಸಭಾ ಮತಕ್ಷೇತ್ರದ ಬಗ್ಗೆ ಮಾಹಿತಿ ಪಡೆದರು.
ಚುನಾವಣೆ ಕಾರ್ಯವನ್ನು ಯಾವುದೇ ಕಾರಣಕ್ಕೂ ಹಗುರವಾಗಿ ಪರಿಗಣಿಸದೆ, ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡ ಅಧಿಕಾರಿ ಸಿಬ್ಬಂದಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದರು. ಮತದಾನ ಹಾಗೂ ಮತದಾನದ ನಂತರದ ಜವಾಬ್ದಾರಿಗಳನ್ನು ಜಾಗರೂಕತೆಯಿಂದ ನಿಗಾವಹಿಸಬೇಕು. ಚುನಾವಣಾ ಕಾರ್ಯವು ಅತ್ಯಂತ ಮಹತ್ವದ ಕಾರ್ಯವಾಗಿದ್ದು ಚುನಾವಣೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ಒಂದು ಸಣ್ಣ ಲೋಪವು ಆಗದಂತೆ ಅತೀ ಜಾಗರೂಕತೆಯಿಂದ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ತಮ್ಮ ಜವಾಬ್ದಾರಿ ಹಾಗೂ ಕರ್ತವ್ಯಗಳನ್ನು ನಿರ್ಲಕ್ಷಿಸದಂತೆ ಸೂಚನೇ ನೀಡಿದರು.
ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಮತಗಟ್ಟೆಗಳ ಮೇಲೆ ಹೆಚ್ಚಿನ ನಿಗಾವಹಿಸಿ ಅಂತಹ ಮತಗಟ್ಟೆ ವ್ಯಾಪ್ತಿಯಲ್ಲಿನ ಮತದಾರರಲ್ಲಿ ಆತ್ಮ ವಿಶ್ವಾಸವನ್ನು ಮೂಡಿಸಲು ಸ್ವೀಪ್ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಬೇಕು. ಮನೆಯಿಂದ ಮತದಾನ ಮಾಡಲು ನೋಂದಾಯಿತರಾಗಿರುವ ಹಿರಿಯ ನಾಗರಿಕರಿಂದ, ವಿಕಲಚೇತನರಿಂದ ಮತದಾನ ಪಡೆಯಲು ತೆರಳುವ ತಂಡಗಳಿಗೆ ಸರಿಯಾದ ತರಬೇತಿ ನೀಡಬೇಕು. ಮತದಾರ ಮುಕ್ತವಾಗಿ ಮತದಾನ ಮಾಡಲು ಶಾಂತಿಯುತವಾದ, ಸುವ್ಯವಸ್ಥಿತವಾದ ವಾತಾವರಣ ರೂಪಿಸಬೇಕು.
ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳ ಅನ್ವಯ ಮತದಾನ ಪೂರ್ವದ ಮತ್ತು ಮತದಾನ ದಿನದ ಸಿದ್ದತೆಗಳನ್ನು ಖಚಿತಪಡಿಸಿಕೊಳ್ಳಬೇಕು. ಚುನಾವಣಾಧಿಕಾರಿಗಳು ಸೇರಿದಂತೆ ಎಲ್ಲ ನಿಯೋಜಿತ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುವಂತೆ ವೀಕ್ಷಕರು ತಿಳಿಸಿದರು.
ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳಾದ ರಾಹುಲ ಶಿಂಧೆ ಅವರು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ಸಾರ್ವತ್ರಿಕ ಚುನಾವಣೆಯು ಮುಕ್ತ, ಶಾಂತಿಯುತ ಹಾಗೂ ನ್ಯಾಯಸಮ್ಮತವಾಗಿ ಜರುಗಿಸಲು ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಶೃತಿ, ಸಹಾಯಕ ಚುನಾವಣಾಧಿಕಾರಿ ಬಸವರಾಜ ಅಡವಿಮಠ ಸೇರಿದಂತೆ ಚಿಕ್ಕೋಡಿ ಲೋಕಸಭಾ ಮತ ಕ್ಷೇತ್ರದ ವ್ಯಾಪ್ತಿಯ ವಿಧಾನ ಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ವಿವಿಧ ಸಮಿತಿಗಳ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು
+ There are no comments
Add yours